Tag: rajanna

  • ಮುದ್ದಹನುಮೇಗೌಡ್ರನ್ನ ‘ಮುದ್ದು’ ಮಾಡಿದ ಕೈ ನಾಯಕರು

    ಮುದ್ದಹನುಮೇಗೌಡ್ರನ್ನ ‘ಮುದ್ದು’ ಮಾಡಿದ ಕೈ ನಾಯಕರು

    ತುಮಕೂರು: ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಡಿ.ಸಿ.ಎಂ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಜೆ.ಡಿ.ಎಸ್. ಮುಖಂಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನ ಮಾಡಿದ್ದರು.

    ಮುದ್ದಹನುಮೇಗೌರ ಜೊತೆ ಚರ್ಚೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ನಮ್ಮ ಅಧ್ಯಕ್ಷರು ನಿರ್ದೇಶನ ನೀಡಿದ್ದರು. ಅದರ ಪ್ರಯುಕ್ತ ನಾವು ಬಂದು ಇವತ್ತು ಮುದ್ದಹನುಮೇಗೌಡ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ಪಾರ್ಲಿಮೆಂಟ್ ಸದಸ್ಯರಾಗಿ ಪಕ್ಷದ ಒಬ್ಬ ಪ್ರಾಮಾಣಿಕ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡುವಂತಹ ಜನಪರ ನಾಯಕರಾಗಿದ್ದಾರೆ. ಮೈತ್ರಿ ಸರ್ಕಾರದಿಂದ, ನಮ್ಮ ಪಕ್ಷದ ನಾಯಕರಿಂದಲೇ ಅವರಿಗೆ ಅನ್ಯಾಯವಾಗಿದೆ ಎಂದು ನಾನೇ ಹೇಳಿದ್ದೇನೆ ಎಂದರು.

    ಇಂತಹ ತೀರ್ಮಾನವಾದಾಗ ನಮ್ಮೆಲ್ಲರಿಗೂ ನೋವಾಗುತ್ತದೆ. ರಾಜಕೀಯ ಬೆಳವಣಿಗೆಯಲ್ಲಿ ಇಂತಹ ಘಟನೆಗಳು ಆಗುವುದನ್ನು ಇತಿಹಾಸದಲ್ಲಿ ನೋಡಿದ್ದೇವೆ. ಪಕ್ಷದ ನಾಯಕರೆಲ್ಲರೂ ಸೇರಿ ಚರ್ಚೆ ಮಾಡಿ ಅವರನ್ನು ಗೌರವಯುತವಾಗಿ ನೋಡಿಕೊಳ್ಳುತ್ತೇವೆ ಎಂಬ ಭರವಸೆ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡೋಣ ಎಂದು ಪಕ್ಷದ ಪರವಾಗಿ ನಾವು ಮನವಿ ಮಾಡಿಕೊಂಡಿದ್ದೇವೆ. ಅವರಿಗೆ ಎಷ್ಟೆ ನೋವಿದ್ದರೂ ನಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಹೀಗಾಗಿ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೈತ್ರಿಯಿಂದ ಈ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ತುಮಕೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಬೇಕಿತ್ತು. ಆಗ ಮುದ್ದೆಹನುಮೇಗೌಡರು ಸಾಮಾನ್ಯ ಶಾಸಕರಾಗಿ ಸತತ 5 ವರ್ಷ ಸೇವೆ ಮಾಡಿಕೊಂಡು ಬಂದಿದ್ದರು. ಈಗ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರುಕಾರ್ಯಕರ್ತರ ಮಾತಿಗೆ ಮಣಿದು ನಾಮಪತ್ರ ಸಲ್ಲಿಸಿದ್ದರು. ನಾವು ಮನವೊಲಿಸುವ ಪ್ರಯತ್ನ ಮಾಡಿದ್ದೇವೆ. ಇಂದು ನಾವು ಅವರ ಮನೆಗೆ ಬಂದಾಗ ಪ್ರೀತಿ-ಗೌರವದಿಂದ ಕಂಡಿದ್ದಾರೆ. ನೀವು ಪಕ್ಷಕ್ಕಾಗಿ ನಾಮಪತ್ರ ವಾಪಸ್ ತೆಗೆದುಕೊಳ್ಳಿ ಎಂದು ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಅದಕ್ಕೆ ಅವರು ನಮ್ಮ ಕಾರ್ಯಕರ್ತರ ಜೊತೆ ಮಾತನಾಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಜೊತೆಗೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವುಂಟು ಮಾಡುವುದಿಲ್ಲ ಎಂದು ಹೇಳಿದ್ದಾರೆ. ನನಗೆ ಅವರ ಮೇಲೆ ವಿಶ್ವಾಸ ಇದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.

  • ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ – ಮುದ್ದಹನುಮೇಗೌಡರ ನಡೆ ಇನ್ನೂ ನಿಗೂಢ!

    ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ – ಮುದ್ದಹನುಮೇಗೌಡರ ನಡೆ ಇನ್ನೂ ನಿಗೂಢ!

    ತುಮಕೂರು: ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆದರೆ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ನಾಮಪತ್ರ ವಾಪಸ್ ತೆಗೆದುಕೊಳ್ಳುತ್ತಾರಾ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ.

    ಮುದ್ದಹನುಮೇಗೌಡರು ತಮ್ಮ ಬೆಂಬಲಿಗರ ಜೊತೆ ಕೊನೆ ಸುತ್ತಿನ ಸಭೆ ಕರೆದಿದ್ದಾರೆ. ಬೆಂಗಳೂರಿನ ಸಂಜಯ ನಗರದಲ್ಲಿರುವ ನಿವಾಸದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿನ ನಿರ್ಣಯದಂತೆ ಮುದ್ದಹನುಮೇಗೌಡರು ತಮ್ಮ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಈ ಮಧ್ಯೆ ರೆಬೆಲ್ ಮುದ್ದಹನುಮೇಗೌಡರ ಮನವೊಲಿಸುವ ಕಸರತ್ತು ಮುಂದುವರಿದಿದೆ. ಡಿ.ಸಿ.ಎಂ ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಜೆ.ಡಿ.ಎಸ್. ಮುಖಂಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮುದ್ದಹನುಮೇಗೌಡರು ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಮುದ್ದೆಹನುಮೇಗೌಡ ಜೊತೆಗೆ ಇನ್ನೋರ್ವ ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಾಮಪತ್ರ ವಾಪಸ್ ತೆಗೆದುಕೊಳ್ಳುವುದು ಖಚಿತವಾಗಿದೆ. ಒಂದು ವೇಳೆ ರಾಜಣ್ಣ ಮತ್ತು ಮುದ್ದಹನುಮೇಗೌಡರು ನಾಮಪತ್ರವನ್ನು ವಾಪಸ್ ಪಡೆದುಕೊಂಡರೆ ಮಾಜಿ ಪ್ರಧಾನಿ ದೇವೇಗೌಡರ ಗೆಲುವಿನ ದಾರಿ ಸುಲಭವಾಗುತ್ತದೆ ಎಂದು ಹೇಳಲಾಗುತ್ತಿದೆ.

  • ತುಮಕೂರಲ್ಲಿ ದೇವೇಗೌಡರಿಗೆ ಮತ್ತೊಂದು ಶಾಕ್!

    ತುಮಕೂರಲ್ಲಿ ದೇವೇಗೌಡರಿಗೆ ಮತ್ತೊಂದು ಶಾಕ್!

    ತುಮಕೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡು ಅಳೆದು ತೂಗಿ ಕೊನೆಗೆ ತುಮಕೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ ಈಗ ಅದೇ ಕ್ಷೇತ್ರದಿಂದ ದೇವೇಗೌಡರಿಗೆ ಮತ್ತೊಂದು ಬಿಗ್ ಶಾಕ್ ಆಗಿದೆ.

    ಒಂದು ಕಡೆ ಮುದ್ದಹನುಮೇಗೌಡರ ಬಂಡಾಯ ನಡೆಸುತ್ತಿದ್ದಾರೆ. ಇತ್ತ ಸಂಸದರ ಬಂಡಾಯದ ಜೊತೆಗೆ ಕೆ.ಎನ್ ರಾಜಣ್ಣನೂ ರೆಬಲ್ ಆಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜಣ್ಣ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಸೋಮವಾರ ಕೈ ಬಂಡಾಯ ಅಭ್ಯರ್ಥಿಯಾಗಿ ಕೆ.ಎನ್ ರಾಜಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಒಂದು ವೇಳೆ ಮುದ್ದಹನುಮೇಗೌಡರು ನಾಮಪತ್ರ ವಾಪಸ್ ಪಡೆದರೆ, ದೇವೇಗೌಡರ ವಿರುದ್ಧ ಗುಟುರು ಹಾಕಲು ರಾಜಣ್ಣ ಸಿದ್ಧವಾಗುತ್ತಿದ್ದಾರೆ.

    ಕಾಂಗ್ರೆಸ್ಸಿನ ಹಾಲಿ ಸಂಸದರಾದ ಮುದ್ದೆಹನುಮೇಗೌಡರಿಗೆ ಲೋಕಸಭಾ ಚುನವಣಾ ಟಿಕೆಟ್ ಕೈ ತಪ್ಪಿದೆ. ಇದರಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮುದ್ದೆಹನುಮೇಗೌಡರು ತಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದರು. ನಾಳೆ ನಾಮಪತ್ರ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ.

    ಇತ್ತ ಡಿಸಿಎಂ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರನ್ನು ಕರೆದು ಖಾಸಗಿ ಹೋಟೆಲಿನಲ್ಲಿ ಸಭೆ ನಡೆಸುತ್ತಿದ್ದಾರೆ. ಆದರೆ ಈ ಸಭೆಗೆ ಬಂಡಾಯ ಅಭ್ಯರ್ಥಿಗಳಾದ ಮುದ್ದೆಹನುಮೇಗೌಡ ಮತ್ತು ರಾಜಣ್ಣ ಇಬ್ಬರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಮುದ್ದಹನುಮೇಗೌಡ ತುಮಕೂರಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ತಮ್ಮ ಸಭೆಯನ್ನು ಮುಂದುವರಿಸಿದ್ದಾರೆ. ಕೊರಟಗೆರೆ ಕಾಂಗ್ರೆಸ್ ಮುಖಂಡ ಎ.ಡಿ.ಬಲರಾಮಯ್ಯ ಮನೆಯಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕರ್ತರ ಜೊತೆ ಚುನಾವಣಾ ಸಮಾಲೋಚನೆ ನಡೆಸುತ್ತಿದ್ದಾರೆ.

  • ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಮತ ಹಾಕಿದ್ರೆ, ನಿಮ್ಮ ಗ್ರಹಚಾರ ಸರಿ ಇರಲ್ಲ- ಶಾಸಕ ಕೆ ಎನ್ ರಾಜಣ್ಣ ಧಮ್ಕಿ

    ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಮತ ಹಾಕಿದ್ರೆ, ನಿಮ್ಮ ಗ್ರಹಚಾರ ಸರಿ ಇರಲ್ಲ- ಶಾಸಕ ಕೆ ಎನ್ ರಾಜಣ್ಣ ಧಮ್ಕಿ

    ತುಮಕೂರು: ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಮತದಾರರಿಗೆ ಧಮ್ಕಿ ಹಾಕುವ ತಮ್ಮ ಚಾಳಿಯನ್ನು ಮುಂದುವರೆಸಿದ್ದಾರೆ.

    ಮಧುಗಿರಿ ಪಟ್ಟಣದ 14 ನೇ ವಾರ್ಡ್ ನಲ್ಲಿರುವ ಮಂಡ್ರ ಕಾಲೋನಿಯ ಪ್ರಚಾರ ಕಾರ್ಯಕ್ರಮದಲ್ಲಿ ಮತದಾರರಿಗೆ ಬಹಿರಂಗವಾಗಿ ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಮತಹಾಕಿದ್ರೆ ನಿಮ್ಮ ಗ್ರಹಚಾರ ಸರಿಯಿರಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇಲ್ಲಿ ಯಾವ ಪಕ್ಷದವರು ಅಭಿವೃದ್ಧಿ ಮಾಡಿಲ್ಲ. ನಾನೇ ಅಭಿವೃದ್ಧಿ ಮಾಡಿದ್ದು. ಹಾಗಾಗಿ ಕಾಂಗ್ರೆಸ್ ಗೆ ಮತ ಹಾಕಬೇಕು. ಬೇರೆ ಯಾವ ಪಕ್ಷದವರನ್ನೂ ಊರ ಒಳಗಡೆ ಸೇರಿಸ್ಕೋ ಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದೇ ಇದ್ದರೆ ನಿಮ್ಮ ಗ್ರಹಚಾರ ಕೆಡ್ತು ಅಂತಾನೇ ತಿಳ್ಕೊಳ್ಳಿ ಎಂದು ಧಮ್ಕಿ ಹಾಕಿದ್ದಾರೆ.

  • ಸಚಿವ ಡಿಕೆಶಿ ಎದುರೇ ರಹಸ್ಯ ಬಿಚ್ಚಿಟ್ಟ ಮಧುಗಿರಿ `ಕೈ’ ಶಾಸಕ ರಾಜಣ್ಣ!

    ಸಚಿವ ಡಿಕೆಶಿ ಎದುರೇ ರಹಸ್ಯ ಬಿಚ್ಚಿಟ್ಟ ಮಧುಗಿರಿ `ಕೈ’ ಶಾಸಕ ರಾಜಣ್ಣ!

    ತುಮಕೂರು: ಕಾರ್ಯಕ್ರಮವೊಂದರಲ್ಲಿ ಸಚಿವ ಡಿಕೆಶಿ ಎದುರೇ ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.

    ಮಧುಗಿರಿಯ ಬಡವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ನಮ್ಮ ಕ್ಷೇತ್ರದಲ್ಲಿ ಸುಮಾರು 15-20 ದಿವಸದ ಹಿಂದೆಯೇ ಹೇಳಿದ್ದೆ. ಸಾಲ ಮನ್ನಾ ಆಗ್ತದೆ. ಹೀಗಾಗಿ ಎಲ್ಲರೂ ಸಾಲ ತಗೊಳ್ಳಿ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಬಾರಿ ಸಾಲ ಮನ್ನಾ ಮಾಡೇ ಮಾಡುತ್ತದೆ ಅಂತ ಹೇಳಿದ್ದೆನು.

    ಇನ್ನು ಸಾಲ ಮನ್ನಾ ಮಾಡಿದ ಹಿನ್ನೆಲೆಯಲ್ಲಿ ನಮ್ಮ ತಾಲೂಕು, ನಮ್ಮ ಕ್ಷೇತ್ರಕ್ಕೆ 74 ಕೋಟಿ ರೂ. ಸಾಲ ಮನ್ನಾ ಆಗಿದೆ. ಸುಮಾರು 25,526 ಕುಟುಂಬದ ಸಾಲ ಮನ್ನಾ ಆಗಿದೆ. ಸಾಲ ಕೊಡುವ ಸಮಯದಲ್ಲಿ ನಾವೇನು ನಮ್ಮ ಪಾರ್ಟಿಯವನಾ ಅಂತ ಕೇಳ್ತಾ ಇರಲಿಲ್ಲ. ಅಥವಾ ನಮ್ಮ ಪಾರ್ಟಿಯವರಿಗೆ ಮಾತ್ರ ಸಾಲ ಕೊಡಿ ಅಂತಾನೂ ಹೇಳಿಲ್ಲ. ನಮ್ಮ ಜಾತಿಯವರು ಅಂತ ಕೇಳಿಯೂ ಸಾಲ ಕೊಟ್ಟಿಲ್ಲ. ರೈತಾಪಿ ಕುಟುಂಬದ ಜನ ಕಷ್ಟದಲ್ಲಿದ್ದಾರೆ ಅಂತ ಸಾಲ ಕೊಟ್ಟಿದ್ದೇವೆ ಅಂತ ಹೇಳಿಕೆ ನೀಡಿದ್ದಾರೆ.

    ಒಟ್ಟಿನಲ್ಲಿ ಇದೀಗ ಸಚಿವ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜಣ್ಣ ಗಂಟಾಘೋಷವಾಗಿ ಸಾಲ ಮನ್ನಾ ರಹಸ್ಯವನ್ನ ಬಿಚ್ಚಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.