Tag: soil

  • ಕೊಡಗಿನಲ್ಲಿ ಮಳೆರಾಯನ ಅವಾಂತರ- ಎರಡು ಮನೆಗಳ ಮೇಲೆ ಮಣ್ಣು ಕುಸಿತ

    ಕೊಡಗಿನಲ್ಲಿ ಮಳೆರಾಯನ ಅವಾಂತರ- ಎರಡು ಮನೆಗಳ ಮೇಲೆ ಮಣ್ಣು ಕುಸಿತ

    ಕೊಡಗು: ಆರೆಂಜ್ ಅಲರ್ಟ್‍ನಲ್ಲಿರೋ ಕೊಡಗಿನ ವಿವಿಧೆಡೆ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ವಿರಾಜಪೇಟೆ ತಾಲೂಕಿನಲ್ಲಿ ಜಿಟಿ ಜಿಟಿ ಮಳೆಯ ಪರಿಣಾಮ ಮಲೆತಿರಕೆ ಬೆಟ್ಟದ ಸಮೀಪ ಇರುವ ಎರಡು ಮನೆಗಳ ಮೇಲೆ ಮಣ್ಣು ಕುಸಿದಿದೆ.

    ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗ್ರಾಮದ ಪುಪ್ಪರಾಜ್ ಮತ್ತು ದಿನೇಶ್ ಎಂಬವರ ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಮನೆಯಲ್ಲಿ ಇದ್ದವರನ್ನು ಸನೀಹದ ಸಮುದಾಯ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಪೋಕ್ಲು ಬಳಿ ಕಾವೇರಿ ನದಿ ಉಕ್ಕಿ ಹರಿಯುತ್ತಿರೋದ್ರಿಂದ ಮಳೆ ಮುಂದುವರಿದಲ್ಲಿ ರಸ್ತೆ ಮುಳುಗಡೆಯಾಗುವ ಭೀತಿ ಕಾಡುತ್ತಿದೆ.

    ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಗಣನೀಯ ಏರಿಕೆಯಾಗುತ್ತಿದೆ. ಕೊಡಗಿನಲ್ಲಿ ವಾಡಿಕೆ ಮಳೆಯಾಗದಿದ್ದರೂ ಕಳೆದ ಬಾರಿ ಭೂ ಕುಸಿತ ಉಂಟಾಗಿದ್ದ ಸ್ಥಳಗಳಲ್ಲಿ ಕುಸಿಯುತ್ತಿರೋ ಸಣ್ಣ ಪ್ರಮಾಣದ ಮಣ್ಣು ಆತಂಕ ಸೃಷ್ಟಿಸಿದೆ.

    ಒಟ್ಟಿನಲ್ಲಿ ಹೀಗೇ ಮಳೆ ಹೆಚ್ಚಾದಲ್ಲಿ ಮತ್ತೆ ಯಾವ ಅನಾಹುತ ಎದುರಸಬೇಕಾಗುತ್ತೋ ಅನ್ನೋ ಭಯದಲ್ಲೇ ಜಿಲ್ಲೆಯ ಜನ ದಿನದೂಡುವಂತಾಗಿರೋದಂತು ಸತ್ಯ.

  • ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಮಕ್ಕಳಿಬ್ಬರ ದುರ್ಮರಣ!

    ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಮಕ್ಕಳಿಬ್ಬರ ದುರ್ಮರಣ!

    ಚಿಕ್ಕಬಳ್ಳಾಪುರ: ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ತಾಲೂಕಿನ ಕುಮ್ಮರವಾಂಡ್ಲಪಲ್ಲಿಯಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಮೂಲದ ಮಹೇಶ್-ನಾಗಮಣಿ ಬಡ ದಂಪತಿ ಕೂಲಿ ಅರಸಿ ಕಳೆದ 10 ವರ್ಷಗಳ ಹಿಂದೆ ಅನಂತಪುರ ಜಿಲ್ಲೆಗೆ ತೆರಳಿದ್ದರು. ಜಿಲ್ಲೆಯ ಕದಿರಿ ತಾಲೂಕಿನ ಕುಮ್ಮರವಾಂಡ್ಲಪಲ್ಲಿ ಹಮಾಲಿ ಕಾಲೋನಿಯಲ್ಲಿ ಕಳೆದ 3 ವರ್ಷಗಳಿಂದ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದ ಮಹೇಶ್, ಕಲ್ಲು ಹೊಡೆಯುವ ಕೆಲಸ ಮಾಡುತ್ತಿದ್ದರು.

    ಈ ಬಡ ದಂಪತಿಗೆ ಆರು ಜನ ಮಕ್ಕಳಿದ್ದು ಪತಿ ಮಹೇಶ್ ಕೆಲಸಕ್ಕೆ ಹೋದರೆ, ಪತ್ನಿ ನಾಗಮಣಿ ಮದ್ಯವ್ಯಸನಿಯಾಗಿದ್ದಾಳೆ. ಹೀಗಾಗಿ ವಿಪರೀತ ಕುಡಿದು ಆಡುಗೆ ಮಾಡದೆ ಹಾಗೆಯೇ ಮಲಗಿ ಬಿಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ಒಂದು ಗಂಡು ಮಗು ಹಾಗೂ ಹೆಣ್ಣು ಮಗು ಊಟ ಇಲ್ಲದೆ ಮಣ್ಣು ತಿಂದು ಸಾವನ್ನಪ್ಪಿದ್ದಾರೆ.

    ಘಟನೆ ನಂತರ ಸ್ಥಳೀಯರು ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇವರ ಪರಿಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳೀಯ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳ ಸಹಾಯದಿಂದ ಉಳಿದ ನಾಲ್ಕು ಮಕ್ಕಳಿಗೆ ಆಶ್ರಯ ಕಲ್ಪಿಸಲಾಗಿದೆ. ಉಳಿದಂತೆ ಪೊಲೀಸರೇ ಬಡ ದಂಪತಿಗೆ ಮನೆ ಕಟ್ಟಿಸಿಕೊಡಲು ಮುಂದಾಗಿದ್ದಾರೆ.

    ಬಡ ದಂಪತಿಯ ಸ್ಥಿತಿ ಬಹಳಷ್ಟು ಶೋಚನೀಯವಾಗಿದ್ದು ತಿನ್ನಲು ಊಟವೂ ಇಲ್ಲ. ಮಲಗಲು ಮನೆಯೂ ಇಲ್ಲ. ಮುರುಕಲು ಗುಡಿಸಲಿನಲ್ಲೇ ವಾಸ ಮಾಡುತ್ತಿದ್ದು, ಇವರ ದಯನೀಯ ಸ್ಥಿತಿಗೆ ಇಬ್ಬರು ಮಕ್ಕಳು ಮಣ್ಣು ತಿಂದು ಅಸುನೀಗಿದ್ದಾರೆ.

  • ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ

    ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ

    ಮಂಡ್ಯ: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆಗೆ ಕ್ಯಾತನಹಳ್ಳಿ ಗ್ರಾಮದಲ್ಲಿರುವ 9 ಎಕರೆ ತೆಂಗಿನತೋಟದಲ್ಲಿ ಎಲ್ಲ ಸಿದ್ಧತೆಗಳು ನಡೆಯುತ್ತಿದೆ. ಗ್ರಾಮಸ್ಥರೆಲ್ಲಾ ಸೇರಿ ಗುಂಡಿ ತೆಗೆಯುತ್ತಿದ್ದಾರೆ.

    ಕ್ಯಾತನಹಳ್ಳಿ ಮೈದಾನದಿಂದ ಪಾರ್ಥಿವ ಶರೀರ ಬಂದ ನಂತರ ಅಂತ್ಯಕ್ರಿಯೆ ನಡೆಯಲಿದ್ದು, ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಅಂತ್ಯಕ್ರಿಯೆ ನಡೆಸಲಿದ್ದಾರೆ. ರೈತ ಮುಖಂಡರು 30 ಜಿಲ್ಲೆಗಳಿಂದ ಮಣ್ಣು ತಂದಿದ್ದಾರೆ ಎಂದು ಕ್ಯಾತನಹಳ್ಳಿಯಲ್ಲಿ ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ರೈತ ಸುರೇಶ್ ಗೌಡ ಹೇಳಿಕೆ ನೀಡಿದ್ದಾರೆ.

    ಸದ್ಯ ಕ್ಯಾತನಹಳ್ಳಿಯಲ್ಲಿರುವ ಪುಟ್ಟಣ್ಣಯ್ಯ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದೆ. ತಮ್ಮ ನೆಚ್ಚಿನ ಹೋರಾಟಗಾರನ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಬರುವವರಿಗೆ ಪುಟ್ಟಣ್ಣಯ್ಯ ಅಭಿಮಾನಿಗಳು ಕ್ಯಾತನಹಳ್ಳಿ ಸಂತೆ ಮೈದಾನದಲ್ಲಿ ತಿಂಡಿ-ಊಟದ ವ್ಯವಸ್ಥೆ ಮಾಡ್ತಿದ್ದಾರೆ. ಈ ಮೂಲಕವಾದ್ರೂ ಒಂದಷ್ಟು ಅನ್ನದ ಋಣ ತೀರಿಸ್ತೇವೆ ಅಂತಿದ್ದಾರೆ ಸುತ್ತಮುತ್ತಲಿನ ಹಳ್ಳಿಗಳ ರೈತರು.

    ಮಕ್ಕಳು ಮತ್ತು ಕುಟುಂಬ ಆಗಮನ ವಿಳಂಬ ಹಿನ್ನೆಲೆಯಲ್ಲಿ ಪುಟ್ಟಣ್ಣಯ್ಯ ಅಂತ್ಯಕ್ರಿಯೆ ವಿಳಂಬವಾಗಿತ್ತು. ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಪುಟ್ಟಣ್ಣಯ್ಯ ತಮ್ಮ ಲೇಟ್ ರಮೇಶ್ ಪತ್ನಿ ಸುಜಾತ, ಮಕ್ಕಳಾದ ಮನು, ಮೋಹನ್ ಆಗಮಿಸಿದ್ದಾರೆ. ಯುಎಸ್‍ಎಯಿಂದ ಪುಟ್ಟಣ್ಣಯ್ಯರ ಎರಡನೇ ಮಗಳ ಕುಟುಂಬ ಮಗಳು ಅಕ್ಷತಾ, ಅಳಿಯ ಶ್ರೀನಿವಾಸ್ ಬಂದಿದ್ದಾರೆ. ಕೆನಡಾದಿಂದ ಪುಟ್ಟಣ್ಣಯ್ಯ ಸಹೋದರಿ ರೇಣುಕಾ, ಮೊದಲ ಮಗಳು ಸ್ಮಿತಾ ಹಾಗೂ ಅಳಿಯ ಬಾಲು ಆಗಮಿಸಿದ್ದಾರೆ.

    ಪುಟ್ಟಣ್ಣಯ್ಯ ಮೌಢ್ಯ ವಿರೋಧಿಯಾದ ಕಾರಣ ಯಾವುದೇ ವಿಧಿವಿಧಾನಗಳಿಲ್ಲದ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ನಂತರ ತೆಂಗಿನ ತೋಟದಲ್ಲಿ ಅವರ ತಂದೆ ಮತ್ತು ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಪುಟ್ಟಣ್ಣಯ್ಯ ಎಲ್ಲರನ್ನೂ ಸಮನವಾಗಿ ಕಾಣುತ್ತಿದ್ದರು. ಹೀಗಾಗಿ ಅವರ ಪಾರ್ಥಿವ ಶರೀರಕ್ಕೆ ದಲಿತ ಮಹಿಳೆಯಿಂದ ಮೊದಲಿಗೆ ಪೂಜೆ ನಡೆಯಲಿದೆ ಎಂದು ಪಬ್ಲಿಕ್ ಟಿವಿಗೆ ಪುಟ್ಟಣ್ಣಯ್ಯ ಪುತ್ರ ದರ್ಶನ್ ಹೇಳಿದ್ದಾರೆ.

    ಇತ್ತ ಗಣ್ಯ ವ್ಯಕ್ತಿಗಳು ಮರಣದ ಬಳಿಕ ಶಾಲಾ ಕಾಲೇಜುಗಳಿಗೆ ರಜೆ ನೀಡೋದಕ್ಕೆ ಪುಟ್ಟಣ್ಣಯ್ಯ ವಿರೋಧಿಸ್ತಿದ್ರು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ. ರಜೆ ನೀಡಿದರೆ ಮಕ್ಕಳ ಕಲಿಕೆಗೆ ತೊಂದರೆಯಾಗಲಿದೆ ಅನ್ನೋ ನಿಲುವು ಹೊಂದಿದ್ದ ಪುಟ್ಟಣ್ಣಯ್ಯ ಅವರ ನಿಲುವನ್ನ ಗೌರವಿಸಿ ನಾವು ರಜೆ ನೀಡುವುದು ಬೇಡ ಅನ್ನೊ ನಿರ್ಧಾರಕ್ಕೆ ಬರಲಾಯ್ತು ಅಂತ ಜಿಲ್ಲಾಧಿಕಾರಿ ಮಂಜುಳಾ ಹೇಳಿದ್ದಾರೆ.

  • ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿತ- ಇಬ್ಬರು ಮಹಿಳೆಯರು ಜೀವಂತ ಸಮಾಧಿ

    ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿತ- ಇಬ್ಬರು ಮಹಿಳೆಯರು ಜೀವಂತ ಸಮಾಧಿ

    ಹೈದ್ರಾಬಾದ್: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು, ಮಣ್ಣಿನಡಿ ಸಿಲುಕಿ ಇಬ್ಬರು ಮಹಿಳೆಯರು ಜೀವಂತ ಸಮಾಧಿಯಾದ ಘಟನೆ ಸೋಮವಾರ ಹೈದ್ರಾಬಾದ್‍ನ ಕೊಂಡಪುರ ಪ್ರದೇಶದಲ್ಲಿ ನಡೆದಿದೆ.

    ಸೆಲ್ಲರ್ ನಿರ್ಮಿಸುವ ಸಲುವಾಗಿ ಕಾರ್ಮಿಕರು ಸುಮಾರು 40 ಅಡಿ ಆಳದ ಗುಂಡಿ ತೆಗೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಟ್ಟಡ ನಿರ್ಮಾಣಕ್ಕೆ ಹಾಕಲಾಗಿದ್ದ ರಾಡ್‍ಗಳ ಭಾರಕ್ಕೆ ಮಣ್ಣು ಕುಸಿದಿದ್ದು ಮಹಿಳೆಯರು ಸಾವನ್ನಪ್ಪಿದ್ದಾರೆ.

    ಮೃತ ಮಹಿಳೆಯರನ್ನು ಭರತಮ್ಮ ಹಾಗೂ ಕಿಸ್ತಮ್ಮ ಎಂದು ಗುರುತಿಸಲಾಗಿದ್ದು, 2 ಗಂಟೆಗಳ ಕಾರ್ಯಾಚರಣೆ ಬಳಿಕ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಘಟನೆಯಲ್ಲಿ ಮೃತ ಮಹಿಳೆಯರ ಗಂಡಂದಿರಾದ ಬಲರಾಜು ಹಾಗೂ ಪಾಪಯ್ಯ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣಿನ ಪರೀಕ್ಷೆ ಮಾಡಿಸಿರಲಿಲ್ಲ ಹಾಗೂ ಸುರಕ್ಷಾ ಕ್ರಮಗಳನ್ನ ಕೈಗೊಂಡಿರಲಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಡಿ ಸೈಟ್ ಎಂಜಿನಿಯರ್ ಹಾಗೂ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಾಗಿದೆ.