ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟ (WFI)ದ ಮೇಲೆ ವಿಧಿಸಲಾಗಿದ್ದ ಅಮಾನತು ಆದೇಶವನ್ನು ಕ್ರೀಡಾ ಸಚಿವಾಲಯ ರದ್ದುಗೊಳಿಸಿದೆ.
ಮುಂದಿನ ಸೂಚನೆ ಬರುವವರೆಗೆ ಒಕ್ಕೂಟದ ದೈನಂದಿನ ಕಾರ್ಯಾಚರಣೆಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಯಿಂದ ದೂರವಿರಲು ಹೊಸದಾಗಿ ಆಯ್ಕೆಯಾದ ಕಾರ್ಯಕಾರಿ ಸಮಿತಿಗೆ ಸೂಚನೆ ನೀಡಿದೆ.
WFI ಸೂಕ್ತ ಕ್ರಮಗಳನ್ನು ತೆಗೆದುಕೊಂಡಿರುವುದರಿಂದ ಕ್ರೀಡೆ ಮತ್ತು ಕ್ರೀಡಾಪಟುಗಳ ಹಿತದೃಷ್ಟಿಯಿಂದ ಸಚಿವಾಲಯವು ಅಮಾನತು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಕ್ರಮ ಕೈಗೊಂಡಿದ್ದಕ್ಕಾಗಿ ನಾನು ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದು ನಮಗೆ ಸುಗಮವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಕ್ರೀಡೆಯ ಹಿತದೃಷ್ಟಿಯಿಂದ ಇದು ಅಗತ್ಯವಾಗಿತ್ತು. ಸ್ಪರ್ಧೆಗಳ ಕೊರತೆಯಿಂದ ಕ್ರೀಡಾಪಟುಗಳು ಬಳಲುತ್ತಿದ್ದರು ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.
ಅಮ್ಮನ್ನಲ್ಲಿ ನಡೆಯಲಿರುವ ಏಷ್ಯನ್ ಚಾಂಪಿಯನ್ಶಿಪ್ಗೆ ಆಯ್ಕೆ ಟ್ರಯಲ್ಸ್ ಸೇರಿದಂತೆ ಚಟುವಟಿಕೆಗಳನ್ನು ಪುನರಾರಂಭಿಸಲು ಈ ಆದೇಶ ದಾರಿ ಮಾಡಿಕೊಟ್ಟಿದೆ. ಡಿಸೆಂಬರ್ 21 ರಂದು ಆಯ್ಕೆಯಾದ ಹೊಸ ಸಂಸ್ಥೆಯ ಆಡಳಿತ ಮತ್ತು ಕಾರ್ಯವಿಧಾನದ ಸಮಗ್ರತೆಯಲ್ಲಿನ ಲೋಪಗಳಿಗಾಗಿ ಸಚಿವಾಲಯವು 2023 ರ ಡಿ.24 ರಂದು WFI ಅನ್ನು ಅಮಾನತುಗೊಳಿಸಿತ್ತು.
ಸಂಜಯ್ ಸಿಂಗ್ ನೇತೃತ್ವದ ಒಕ್ಕೂಟವು ಮಾಜಿ WFI ಮುಖ್ಯಸ್ಥ ಬ್ರಿಜ್ಭೂಷಣ್ ಶರಣ್ ಸಿಂಗ್ ಅವರ ಭದ್ರಕೋಟೆಯಾದ ಗೊಂಡಾದ ನಂದಿನಿ ನಗರದಲ್ಲಿ 15 ವರ್ಷದೊಳಗಿನವರ ಮತ್ತು 20 ವರ್ಷದೊಳಗಿನವರ ರಾಷ್ಟ್ರೀಯ ಚಾಂಪಿಯನ್ಶಿಪ್ಗಳನ್ನು ನಡೆಸುವುದಾಗಿ ಘೋಷಿಸಿತ್ತು. ಮಾಜಿ ಬಿಜೆಪಿ ಸಂಸದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕಾರಣ ಈ ಸ್ಥಳದ ಆಯ್ಕೆಯು ಸರ್ಕಾರವನ್ನು ಕೆರಳಿಸಿತ್ತು.
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ (Sports Ministry) ಅಮಾನತುಗೊಳಿಸಿದೆ.
ಡಬ್ಲ್ಯೂಎಫ್ಐ (WFI) ಸಂವಿಧಾನ ಮತ್ತು ನಿಯಮವನ್ನು ಉಲ್ಲಂಘಿಸಿ ನಿರ್ಧಾರವನ್ನು ಕೈಗೊಂಡಿದ್ದಕ್ಕೆ ಭಾನುವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿ ಆದೇಶ ಪ್ರಕಟಿಸಿದೆ.
ಭಾರತದ ಕುಸ್ತಿ ಫೆಡರೇಶನ್ನ ಹೊಸದಾಗಿ ಚುನಾಯಿತರಾದ ಸಂಜಯ್ ಕುಮಾರ್ ಸಿಂಗ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ 15 ಮತ್ತು 20 ವರ್ಷದ ಒಳಗಿನ ರಾಷ್ಟ್ರೀಯ ಕುಸ್ತಿ ಪಂದ್ಯಾಟ ಉತ್ತರ ಪ್ರದೇಶದದ ಗೊಂಡಾದ ನಂದಿನಿ ನಗರದಲ್ಲಿ ನಡೆಸಲಾಗುವುದು ಎಂದು ಘೋಷಿಸಿದ್ದರು. ರಾಷ್ಟ್ರೀಯ ಕುಸ್ತಿಪಟುಗಳಿಗೆ ಸಾಕಷ್ಟು ಸೂಚನೆ ನೀಡದೇ ಮತ್ತು WFI ನ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದೇ ಈ ಘೋಷಣೆಯನ್ನು ತರಾತುರಿಯಲ್ಲಿ ಮಾಡಲಾಗಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕಲುಷಿತ ಕಾಂಗ್ರೆಸ್ಗೆ ಹಿಂದುತ್ವ ರುಚಿಸಲ್ಲ, ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪಲ್ಲ: ಜೆಡಿಎಸ್ ಕಿಡಿ
ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ. ಯಾವುದೇ ಟೂರ್ನಿ ನಡೆಸುವ ಮೊದಲು ಕಾರ್ಯಕಾರಿ ಸಮಿತಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಹೊಸದಾಗಿ ಚುನಾಯಿತ ಸಮಿತಿಯು ಕ್ರೀಡಾ ಸಂಹಿತೆಯನ್ನು ಕಡೆಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದೆ.
– ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ಭೂಷಣ್ ಬಂಧನಕ್ಕೆ ಒತ್ತಾಯ
ನವದೆಹಲಿ: ಮಹಿಳಾ ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಮತ್ತು ಇತರ ತರಬೇತುದಾರರ ವಿರುದ್ಧ ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು ಈಗ ಮತ್ತೆ ಅಖಾಡಕ್ಕಿಳಿದಿದ್ದಾರೆ.
ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎಂದು ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್ಡಿಕೆ
ಈ ವಿಷಯದ ಬಗ್ಗೆ ಸರ್ಕಾರದ ಸಮಿತಿಯ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸದಿರುವುದು ಹತಾಶೆಯಾಗಿದೆ. ಮಹಿಳಾ ಕುಸ್ತಿಪಟುಗಳ ಹೇಳಿಕೆಯನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ಇದು ಸೂಕ್ಷ್ಮ ವಿಷಯವಾಗಿದೆ. ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ. ದೂರುದಾರರ ಹೆಸರುಗಳನ್ನು ಸೋರಿಕೆ ಮಾಡಬಾರದು ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದಾರೆ.
ಬ್ರಿಜ್ಭೂಷಣ್ ಅವರನ್ನು ಬಂಧಿಸುವವರೆಗೂ ನಾವು ಇಲ್ಲಿಂದ ಹೊರಡುವುದಿಲ್ಲ ಎಂದು ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ. ಪ್ರಕರಣದ ವಿಚಾರವಾಗಿ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ವಿನೇಶ್ ಫೋಗಟ್ ಬೇಸರ ವ್ಯಕ್ತಪಡಿಸಿದ್ದಾರೆ.
ನ್ಯಾಯ ಸಿಗುವವರೆಗೂ ನಮಗೆ ಇಲ್ಲೇ ಊಟ, ಇಲ್ಲೇ ನಿದ್ರೆ. ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ. ಕ್ರೀಡಾ ಸಚಿವಾಲಯವೂ ಏನನ್ನೂ ಹೇಳುತ್ತಿಲ್ಲ. ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುತ್ತಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ. ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದು ವಿನೇಶ್ ಫೋಗಟ್ ನೊಂದು ನುಡಿದಿದ್ದಾರೆ.
ಕ್ರೀಡಾ ಸಚಿವಾಲಯವು (Sports Ministry) ಜನವರಿ 23 ರಂದು ಬಾಕ್ಸರ್ ಮೇರಿ ಕೋಮ್ ನೇತೃತ್ವದ ಐವರು ಸದಸ್ಯರ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೇಳಿತ್ತು. ವರದಿ ಸಲ್ಲಿಕೆಗೆ ಎರಡು ವಾರಗಳ ಗಡುವು ನೀಡಿತ್ತು. ಪ್ರತಿಭಟಿಸಿದ್ದ ಕುಸ್ತಿಪಟುಗಳ ಒತ್ತಾಯದ ಮೇರೆಗೆ ಆರನೇ ಸದಸ್ಯೆಯಾಗಿ ಬಬಿತಾ ಫೋಗಟ್ ಅವರನ್ನು ತನಿಖಾ ಸಮಿತಿಗೆ ಸೇರಿಸಿತ್ತು.
ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ. ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ. ಆದಾಗ್ಯೂ, ಹಲವಾರು ವಿಚಾರಣೆಗಳ ನಂತರ ಕುಸ್ತಿಪಟುಗಳು WFI ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ (Woman Wrestler) ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. WFI ಅಧಿಕಾರಿಗಳು ಅಥ್ಲೀಟ್ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ನವದೆಹಲಿಯ ಜಂತರ್ ಮಂತರ್ನಲ್ಲಿ ವಿನೇಶ್ ಫೋಗಟ್ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್ಐ ಅಧ್ಯಕ್ಷರನ್ನು ತೆಗೆದುಹಾಕುವವರೆಗೆ ನಾವು ಯಾವುದೇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಹ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದನ್ನೂ ಓದಿ: ಬಸವ ತತ್ವದಿಂದ ಭಾರತದ ಪ್ರಜಾಪ್ರಭುತ್ವ ಸದೃಢ- ರಾಹುಲ್ ಗಾಂಧಿ