Tag: teerthodbhava

  • ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕೊಡಗಿನ ಕುಲದೇವತೆ

    ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕೊಡಗಿನ ಕುಲದೇವತೆ

    – ಪುಣ್ಯಸ್ನಾನದಲ್ಲಿ ಮಿಂದೆದ್ದ ಭಕ್ತಸ್ತೋಮ

    ಮಡಿಕೇರಿ: ಕೊಡಗಿನ ಕುಲದೇವತೆ ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಅಪರೂಪದ ಕ್ಷಣಗಳಿಗೆ ಉಸ್ತುವಾರಿ ಸಚಿವ ವಿ ಸೋಮಣ್ಣ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾಕ್ಷಿಯಾದರು.

    ಅತ್ತ ಭಾವ ಪರವಶರಾಗಿ ಕಾವೇರಿ ಭಕ್ತರು ಸ್ತುತಿಸುತ್ತಿದ್ದರೆ, ಇತ್ತ ಪುರೋಹಿತರು ಮಹಾ ಸಂಕಲ್ಪ ಪೂಜೆ, ಮಹಾಪೂಜೆ ಸಹಸ್ರನಾಮಾರ್ಚನೆ, ಮಹಾಮಂಗಳಾರತಿ ಮಾಡುತ್ತಿದ್ದರು. ನಿಗದಿಯಂತೆ ರೋಹಿಣಿ ನಕ್ಷತ್ರ ಕರ್ಕಾಟಕ ಲಗ್ನದಲ್ಲಿ ತೀರ್ಥ ಸ್ವರೂಪಿಣಿಯಾಗಿ ರಾತ್ರಿ 12 ಗಂಟೆ 57 ನಿಮಿಷಕ್ಕೆ ಸರಿಯಾಗಿ ವಿಶ್ವಕ್ಕೆ ತನ್ನ ದರ್ಶನ ನೀಡಿದಳು.

    ಭಕ್ತರ ಸಂತಸ ಭಕ್ತಿ ಭಾವಕ್ಕೆ ಪಾರವೇ ಇರಲಿಲ್ಲ. ಅಲೆ ಅಲೆಯಾಗಿ ತೂಗುತ್ತಾ ತೀರ್ಥಕುಂಡಿಕೆಯಿಂದ ಪವಿತ್ರ ಜಲ ಉಕ್ಕಿಬಂದಿದ್ದನ್ನು ಕಂಡ ಭಕ್ತರು “ಜೈ ಜೈಮಾತಾ, ಕಾವೇರಿ ಮಾತಾ” ಎಂದು ಘೋಷ ಮೊಳಗಿಸುತ್ತಾ ಕಾವೇರಿ ಮಾತೆಯ ದರ್ಶನ ಪಡೆದು ಪುನೀತರಾದರು.

    ಕಾವೇರಿ ತನ್ನ ಸಹೋದರಿ ಗಂಗೆಯೊಂದಿಗೆ ಸೇರಿ ತುಲಾ ಸಂಕ್ರಮಣದ ಈ ಕಾಲದಲ್ಲಿ ತೀರ್ಥ ಸ್ವರೂಪಿಣಿಯಾಗಿ ಉಕ್ಕಿಬರುತ್ತಾಳೆ. ಈ ಸಮಯದಲ್ಲಿ ತಲಕಾವೇರಿಯಲ್ಲಿ ಪುಣ್ಯಸ್ನಾನ ಮಾಡಿ ತೀರ್ಥ ಸಂಗ್ರಹ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಉಸ್ತುವಾರಿ ಸಚಿವ ವಿ ಸೋಮಣ್ಣ, ಕಂದಾಯ ಸಚಿವ ಆರ್ ಅಶೋಕ್, ವಿರಾಜಪೇಟೆ ಶಾಸಕ ಕೆ. ಜಿ ಬೋಪಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳು ಆಗಮಿಸಿದ್ದರು.

    ತೀರ್ಥ ಉದ್ಭವವಾದ ಒಂದು ತಿಂಗಳ ಕಾಲ ತುಲಾ ಸಂಕ್ರಮಣ ಮಹೋತ್ಸವ ನಡೆಯಲಿದ್ದು, ಒಂದು ತಿಂಗಳ ಅವಧಿಯಲ್ಲಿ ಲಕ್ಷಾಂತರ ಭಕ್ತರು ತಲಕಾವೇರಿಗೆ ಭೇಟಿ ನೀಡಿ ತಾಯಿ ಕೃಪೆಗೆ ಪಾತ್ರರಾಗಲಿದ್ದಾರೆ.

  • ತಲಕಾವೇರಿಯಲ್ಲಿ ತೀರ್ಥೋದ್ಭವ ತಯಾರಿ – ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

    ತಲಕಾವೇರಿಯಲ್ಲಿ ತೀರ್ಥೋದ್ಭವ ತಯಾರಿ – ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

    ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

    ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಮಧ್ಯರಾತ್ರಿ 12.59ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಬರಲಿದೆ. ಈ ವಿಸ್ಮಯ ನೋಡಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ತೀರ್ಥೋದ್ಭವಕ್ಕೂ ಮೊದಲು ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಪೂಜೆಗಳು ನೆರವೇರಲಿದೆ.

    ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ನಾನಾ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಮಂಡ್ಯ, ಮೈಸೂರು, ಹಾಸನ ಸೇರಿ ರಾಜ್ಯ, ದೇಶದ ನಾನಾ ಕಡೆಗಳಿಂದ ಭಕ್ತರು ಆಗಮಿಸಲಿದ್ದು, ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿ ಮಾತೆಯ ದರ್ಶನ ಪಡೆಯಲಿದ್ದಾರೆ. ಹೀಗಾಗಿ ಈಗಾಗಲೇ ಲೈಟಿಂಗ್ ವ್ಯವಸ್ಥೆ, ಭದ್ರತೆಗಾಗಿ ಸಿಸಿಟಿವಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

    ತಲಕಾವೇರಿಯಲ್ಲಿ ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ತೀರ್ಥೋದ್ಭವದ ವಿಸ್ಮಯವನ್ನ ನೋಡಲು ಭಕ್ತರ ದಂಡೇ ತಲಕಾವೇರಿಗೆ ಆಗಮಿಸುತ್ತಿದೆ.