Tag: Tejashwini Gowda

  • ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

    ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

    – ಬಿಜೆಪಿ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ, ಅಯೋಗ್ಯರಿಗಲ್ಲ: ಯತ್ನಾಳ್‍ಗೆ ತಿರುಗೇಟು
    – ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ: ತೇಜಸ್ವಿನಿ ಗೌಡ

    ಬೆಂಗಳೂರು: ಕಾಂಗ್ರೆಸ್‍ನವರು ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿಲ್ಲ. ಇದು ನಮ್ಮ ಪುಣ್ಯ. ಕಾಂಗ್ರೆಸ್ ನಾಯಕರಿಗೆ ಪ್ರಬುದ್ಧತೆ ಬಂದಿರುವುದು ಸಂತೋಷ ತಂದಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಸ್ಪೇಸ್ ಸರ್ಜಿಕಲ್ ಸ್ಟ್ರೈಕ್‍ನಿಂದ ಬಿಜೆಪಿಗೆ ಲಾಭ ವಿಚಾರ ಎನ್ನುವ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಕಾಂಗ್ರೆಸ್‍ನವರು ಪೂರ್ಣ ಕೇಳಲಿ. ಬಳಿಕ ಪ್ರತಿಕ್ರಿಯೆ ನೀಡಲಿ. ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಶ್ರೇಯಸ್ಸು ಡಿಆರ್ ಡಿಒ ವಿಜ್ಞಾನಿಗಳಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ವಿಜ್ಞಾನಿಗಳ ಸಾಧನೆಯನ್ನು ದೇಶಕ್ಕೆ ತಿಳಿಯಲಿ ಎನ್ನುವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದರು ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರದ ಅವಸ್ಥೆ ಹರಿದ ಬಟ್ಟೆಯಂತಾಗಿದೆ. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ಗೆ ಅಭ್ಯರ್ಥಿ ಸಿಕ್ಕಿಲ್ಲ. ಹೊಸ ರೀತಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಚುನಾವಣೆ ಹಾಸ್ಯಾಸ್ಪದವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

    ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಿದರೆ ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ಮತದಾರರನ್ನು ಬ್ಲಾಕ್ ಮೇಲ್ ಮಾಡುವ ಹೇಳಿಕೆ. ಮಂಡ್ಯದಲ್ಲಿ ಮುಕ್ತ, ಶಾಂತಿಯುತ ಮತದಾನ ನಡೆಯಬೇಕು. ಈ ನಿಟ್ಟಿನಲ್ಲಿ ಮಂಡ್ಯವನ್ನು ಅತಿ ಸೂಕ್ಷ್ಮ ಕ್ಷೇತ್ರವೆಂದು ಚುನಾವಣಾ ಆಯೋಗ ಘೋಷಿಸಬೇಕು ಎಂದು ಆಗ್ರಹಿಸಿದರು.

    ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ತಪ್ಪಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ತೇಜಸ್ವಿನಿ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಕಳಿಸಿತ್ತು ಹಾಗೂ ಟಿಕೆಟ್ ಸಿಗುವ ನಿರೀಕ್ಷೆ ಹೊಂದಿದ್ದೆವು. ಆದರೆ ಪಕ್ಷದ ತೀರ್ಮಾನದಂತೆ ಟಿಕೆಟ್ ಸಿಗಲಿಲ್ಲ. ಇದೇ ಕಾರಣಕ್ಕೆ ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲು ಸಾಧ್ಯವಿಲ್ಲ. ತುಮಕೂರು ಸಂಸದ ಮುದ್ದಹನುಮೇಗೌಡ ಅವರಂತೆ ತೇಜಸ್ವಿನಿ ಅನಂತ್‍ಕುಮಾರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿ, ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‍ಗೆ ಟಾಂಗ್ ಕೊಟ್ಟರು.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್ ಅವರು, ಬಿಜೆಪಿ ಹೈಕಮಾಂಡ್ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ. ಯಾವುದೇ ಅಯೋಗ್ಯರಿಗೆ ಟಿಕೆಟ್ ಕೊಟ್ಟಿಲ್ಲ. ಚುನಾವಣಾ ಕಣದಲ್ಲಿರುವ ಎಲ್ಲರೂ ಯೋಗ್ಯರೇ. ಎಲ್ಲರೂ ಗೆದ್ದು ಬರುತ್ತಾರೆ ಎಂದು ತಿರುಗೇಟು ಕೊಟ್ಟರು.

    ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ. ಅವುಗಳು ಚುನಾವಣಾ ಸಂಸ್ಕೃತಿಯನ್ನು ಹಾಳು ಮಾಡುತ್ತಿವೆ ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ಮಂಡ್ಯದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಸಿಎಂ ತಮ್ಮ ಮಗ ನಿಖಿಲ್ ನಾಮಪತ್ರ ಸಲ್ಲಿಸುವ ದಿನದಂದು 3 ಗಂಟೆಗೂ ಹೆಚ್ಚು ಕಾಲ ಮೈಸೂರು-ಬೆಂಗಳೂರು ರಸ್ತೆ ಬಂದ್ ಮಾಡಿಸಿದ್ದರು. ನಟರಾದ ಯಶ್, ಹಾಗೂ ದರ್ಶನ್ ವಿರುದ್ಧ ಜೆಡಿಎಸ್ ನಾಯಕರು ಅವಮಾನಕರ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಪತಿ ನಿಧನರಾದ ಬಳಿಕ ಮಹಿಳೆಯರು ರಾಜಕೀಯಕ್ಕೆ ಬರಲೇಬಾರದೆಂಬ ಧೋರಣೆಯನ್ನು ಜೆಡಿಎಸ್‍ನವರು ತೋರುತ್ತಿದ್ದಾರೆ. ಮಂಡ್ಯ ರಾಜಕಾರಣದಲ್ಲಿ ಸುಮಲತಾ ಪರ ಅಲೆ ಇದೆ. ಅಷ್ಟೇ ಅಲ್ಲದೆ ಸುಮಲತಾರಿಗೆ ಬಿಜೆಪಿ ಹಾಗೂ ರೈತಸಂಘದ ಬೆಂಬಲವಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಹೆದರಿದ್ದು, ಅವರ ಮನಸಲ್ಲಿರುವ ಭಯ ನಮಗೆ ಅರ್ಥವಾಗುತ್ತಿದೆ ಎಂದರು.

  • ಈ ಚುನಾವಣೆಯಲ್ಲೂ ಕಪ್ ನಮ್ಮದೇ: ಗೋ.ಮಧುಸೂದನ್

    ಈ ಚುನಾವಣೆಯಲ್ಲೂ ಕಪ್ ನಮ್ಮದೇ: ಗೋ.ಮಧುಸೂದನ್

    – ದೋಸ್ತಿ ಸರ್ಕಾರದಲ್ಲಿ ಮೂರು ಗುಂಪು
    – ಜೆಡಿಎಸ್ ನಂಬರ್ ಝೀರೋ ಆದ್ರೂ ಅಚ್ಚರಿ ಇಲ್ಲ: ತೇಜಸ್ವಿನಿಗೌಡ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆಂದು ಈಗಲೇ ಹೇಳುವುದು ಬೇಡ. ಆದರೆ ಈ ಚುನಾವಣೆಯಲ್ಲಿಯೂ ಕಪ್ ನಮ್ಮದೇ ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿತ್ತು. ಈಗ ಮೊದಲನೇ ಸ್ಥಾನದಲ್ಲಿದೆ. ಆದರೆ ಮೊದಲ ಸ್ಥಾನದಲ್ಲಿದ್ದ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದಿದೆ. ಏನೇ ಆದರೂ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸುತ್ತದೆ ಎಂದು ಹೇಳಿದರು.

    ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‍ನಲ್ಲೇ ಉಳಿಸಿಕೊಳ್ಳಲು ಆಗಲಿಲ್ಲ ಎನ್ನುವ ನೋವು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಒಂದು ರೀತಿಯಲ್ಲಿ ವಿ3 ಆಗುತ್ತಿದೆ. ಎರಡು ಪಕ್ಷಗಳು ಸೇರಿ ಮೈತ್ರಿ ಮಾಡಿಕೊಂಡಿವೆ. ಆದರೆ ಈಗ ದೋಸ್ತಿ ಸರ್ಕಾರದಲ್ಲಿ ಮೂರು ಗುಂಪುಗಳಾಗಿವೆ ಎಂದು ವ್ಯಂಗ್ಯವಾಡಿದರು.

    ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಹಾಕಲು ಜೆಡಿಎಸ್‍ಗೆ ಸಾಧ್ಯವಾಗುತ್ತಿಲ್ಲ. ಇತ್ತ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ವಿಜಯಪುರದಲ್ಲಿ ಅಭ್ಯರ್ಥಿಯೇ ಇಲ್ಲ ಎಂದ ಅವರು, ಸಚಿವ ಆರ್.ವಿ.ದೇಶಪಾಂಡೆ ಅವರ ಪರಿಸ್ಥಿತಿ ನೋಡಿದರೆ ಪಾಪ ಅನಿಸುತ್ತದೆ. ಅವರೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಗೆ ಹೋಗಿದ್ದರು. ದೇಶಪಾಂಡೆ ಅವರದ್ದು ಎಂತಹ ದಯನೀಯ ಸ್ಥಿತಿ ಎಂದು ಲೇವಡಿ ಮಾಡಿದರು.

    ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ದುರಂತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದರಲ್ಲಿ ರಾಜ್ಯ ಸರ್ಕಾರದ ತಪ್ಪಿದೆ. ಕಟ್ಟಡ ಕುಸಿದು, ಭಾರೀ ಅನಾಹುತ ಸಂಭವಿಸಿದ್ದರೂ ಕಟ್ಟಡದ ಮಾಲೀಕರನ್ನು ವಶಕ್ಕೆ ಪಡೆದಿರಲಿಲ್ಲ. ಈಗ ಗಂಗಪ್ಪ ಕಂತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಟ್ಟಡದ ಜಾಗವು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವನ ಹೆಸರಲ್ಲಿದೆ. ಆದರೆ ಜಾಗದ ನಿಜವಾದ ಮಾಲೀಕ ವಿನಯ್ ಕುಲಕರ್ಣಿ. ಅದು ಬೇನಾಮಿ ಆಸ್ತಿಯಾಗಿದೆ. ಹೀಗಾಗಿ ಎಫ್‍ಐಆರ್ ನಲ್ಲಿ ಮಾಜಿ ಸಚಿವ ಹೆಸರು ಸೇರಿಸಬೇಕು ಎಂದು ಆಗ್ರಹಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ಮೇಲೆ ಇನ್ನೂ ಕ್ರಮಕೈಗೊಂಡಿಲ್ಲ. ಇದಕ್ಕೆ ಕಾಂಗ್ರೆಸ್ ನೇರ ಹೊಣೆಯಾಗಿದೆ. ಪ್ರಜಾಪ್ರಭುತ್ವದ ಮೇಲೆ ಕಾಂಗ್ರೆಸ್‍ಗೆ ನಂಬಿಕೆ ಇದ್ದರೆ ಗೋಪಾಲಕೃಷ್ಣ ಅವರನ್ನು ಬಂಧಿಸಲಿ ಎಂದು ಒತ್ತಾಯಿಸಿದರು.

    ಸುಮಲತಾ ಅಂಬರೀಶ್ ಅವರು ನಾಮಪತ್ರ ಸಲ್ಲಿಸುವ ವೇಳೆ ನೆರೆದಿದ್ದ ಜನಸ್ತೋಮ ಕಂಡು ಮೈತ್ರಿ ಸರ್ಕಾರದ ಮುಖಂಡರ ಜಂಘಾಬಲವೇ ಉಡುಗಿ ಹೋಗಿದೆ. ಇದರಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮನೆಗೆ ಬಂದಿದ್ದ ಮಂಡ್ಯ ಮತ್ತು ಹಾಸನದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೂಗಾಡಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಹಾಗೂ ಚಿತ್ರೋದ್ಯಮದವರ ಮೇಲೆ ಕಿಡಿಕಾರುತ್ತಿದ್ದಾರೆ ಎಂದರು.

    ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಅವರು ಮಾತನಾಡಿ, ಧಾರವಾಡದಲ್ಲಿ ನಡೆದ ಕಟ್ಟಡ ದುರಂತದ ಸ್ಥಳಕ್ಕೆ ಇದೂವರೆಗೆ ಸಿಎಂ ಕುಮಾರಸ್ವಾಮಿ ಭೇಟಿಕೊಟ್ಟಿಲ್ಲ. ಅವರಿಗೆ ತಮ್ಮ ಮಗ ಮಂಡ್ಯದಲ್ಲಿ ಸ್ಪರ್ಧೆ ಮಾಡುವುದೇ ಮುಖ್ಯವಾಗಿದೆ. ಹೀಗಾಗಿ ಸಿಎಂ ಧಾರವಾಡಕ್ಕೆ ಹೋಗದೇ ಮಂಡ್ಯದಲ್ಲೇ ಕೂತಿದ್ದಾರೆ. ಈ ಬಾರಿ ಜೆಡಿಎಸ್ ನಂಬರ್ ಝೀರೋ ಆದ್ರೂ ಅಚ್ಚರಿ ಇಲ್ಲ ಎಂದರು.