Tag: Vairamudi Utsav

  • 2 ವರ್ಷಗಳ ಬಳಿಕ ಕಳೆಗಟ್ಟಲಿದೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

    2 ವರ್ಷಗಳ ಬಳಿಕ ಕಳೆಗಟ್ಟಲಿದೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

    ಮಂಡ್ಯ: ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ. ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಉತ್ಸವ ಈ ಬಾರಿ ವಿಜೃಂಭಣೆಯಿಂದ ನೆರವೇರಲಿದೆ. ಈ ಹಿನ್ನೆಲೆ ಇಡೀ ಮೇಲುಕೋಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳುಸುತ್ತಿದೆ.

    ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ. ಯಾದವಾದ್ರಿ, ನಾರಾಯಣಾದ್ರಿ, ಯತಿಶೈಲ, ತಿರುನಾರಾಯಣಪುರ, ಯದುಗಿರಿ, ದಕ್ಷಿಣ ಬದರಿ ಕ್ಷೇತ್ರ.. ಹೀಗೆ ಹಲವಾರು ಹೆಸರುಗಳಿಂದ ಕರೆಯಲ್ಪಡುವ ಮೇಲುಕೋಟೆ ದಕ್ಷಿಣ ಭಾರತದ ಬಹು ಮುಖ್ಯ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲೊಂದು. ಇಲ್ಲಿ ವರ್ಷ ಪೂರ್ತಿ ಉತ್ಸವಗಳು ನೆರವೇರಿದ್ರೂ ಅದ್ರಲ್ಲಿ ಪ್ರಮುಖವಾದುದ್ದು ಅಂದ್ರೆ ವೈರಮುಡಿ ಬ್ರಹ್ಮೋತ್ಸವ.

    ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾದಿಂದಾಗಿ ವೈರಮುಡಿ ಜಾತ್ರಾಮಹೋತ್ಸವ ಭಕ್ತರಿಲ್ಲದೇ ಅತ್ಯಂತ ಸರಳವಾಗಿ ನೆರವೇರಿತ್ತು. ಈ ಬಾರಿ ವಿಜೃಂಭಣೆಯಿಂದ ಉತ್ಸವ ಆಚರಿಸಲು ಮಂಡ್ಯ ಜಿಲ್ಲಾಡಳಿತ ನಿರ್ಧಾರ ಮಾಡಿದ್ದು, 9 ದಿನ ನಡೆಯುವ ಐತಿಹಾಸಿಕ ಬ್ರಹ್ಮೋತ್ಸವಕ್ಕೆ ಕಳೆದ ಎರಡು ದಿನಗಳ ಹಿಂದೆ ಬೆಳಗ್ಗೆ ಗರುಡ ಧ್ವಜಾರೋಹಣದೊಂದಿಗೆ ಚಾಲನೆ ದೊರಕಿದೆ.  ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

    ಮೇಲುಕೋಟೆಗೆ ದೀಪಾಲಂಕಾರ ಮಾಡಲಾಗಿದ್ದು, ಇಡೀ ಮೇಲುಕೋಟೆಯಲ್ಲಿ ವೈಕುಂಠವೇ ಧರಗೆ ಇಳಿದಂತೆ ಕಾಣುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ, ಹಾಸನದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶದಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಮೇಲುಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನು 17ರಂದು ಮಹಾ ರಥೋತ್ಸವ ಹಾಗೂ 18ರಂದು ಕಲ್ಯಾಣಿಯಲ್ಲಿ ತೆಪ್ಪೋತ್ಸವ ಹಾಗೂ ಲೇಜರ್ ಶೋ ನಡೆಯಲಿದೆ.

    ಒಟ್ಟಾರೆ ಈ ಬಾರಿಯ ಅದ್ದೂರಿ ಜಾತ್ರಾಮಹೋತ್ಸವಕ್ಕೆ10 ಲಕ್ಷ ಜನ ಸೇರುವ ನಿರೀಕ್ಷಿಸಲಾಗಿದ್ದು, ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ 10 ಅಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ನಿಯೋಜಿಸಲಾಗಿದೆ.

  • ಮಾ.9 ರಿಂದ ಮೇಲುಕೋಟೆ ವೈರಮುಡಿ ಉತ್ಸವ

    ಮಾ.9 ರಿಂದ ಮೇಲುಕೋಟೆ ವೈರಮುಡಿ ಉತ್ಸವ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21ರವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿಂದು ಉತ್ಸವ ಆಚರಣೆ ಕುರಿತು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ನಂತರ ಮಾತನಾಡಿದ ಗೋಪಾಲಯ್ಯನವರು, ಮಾ.9 ರಿಂದ 21ರವರೆಗೆ ನಡೆಯುವ ವೈರಮುಡಿ ಮಹೋತ್ಸವಕ್ಕೆ ಬರುವ ಎಲ್ಲಾ ಭಕ್ತರಿಗೆ ಅನುಕೂಲವಾಗುವಂತೆ ಸಾರಿಗೆ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಹಾಗೂ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹೇಳಿದರು. ಇದನ್ನೂ ಓದಿ: ಮುಸ್ಲಿಂ ಎಂಬ ಕಾರಣಕ್ಕೆ ಈ ಸರ್ಕಾರ ಒಂದು ನಯಾ ಪೈಸೆ ಕೊಟ್ಟಿಲ್ಲ: ಸಿಎಂ ಇಬ್ರಾಹಿಂ

    ಎಲ್ಲಾ ಇಲಾಖೆಗಳು ಬಹಳ ಜಾಗೃತಿವಹಿಸಬೇಕು ಯಾವುದೇ ಕುಂದು ಕೊರತೆಯಾಗದೇ ವೈರಮುಡಿ ಉತ್ಸವ ಅರ್ಥಪೂರ್ಣವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು. ಉತ್ಸವದಲ್ಲಿ ಸುಮಾರು 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಜಾತ್ರಾ ಅವಧಿಯಲ್ಲಿ ಸ್ವಚ್ಛತೆ ಕಾಪಾಡಲು ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಗತ್ಯಕ್ರಮವನ್ನು ವಹಿಸಬೇಕು. ಜಾತ್ರಾ ಮಹೋತ್ಸವ ಹೆಚ್ಚುವರಿ ಸಿಬ್ಬಂದಿ ಮತ್ತು ಪೌರಕಾರ್ಮಿಕರನ್ನು ನೇಮಿಸಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

    ದೇವಾಲಯದ ಸಮೀಪ ಆಂಬುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ವಾಹನ ಪಾರ್ಕಿಂಗ್, ಬ್ಯಾರಿಕೇಡ್, ರಸ್ತೆ ದುರಸ್ತಿ, ಉತ್ಸವಗಳ ನಿರ್ವಹಣೆ, ದೀಪಾಲಂಕಾರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಸೂಚನೆ ನೀಡಿದರು. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

    ಸಭೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ಜಿಲ್ಲಾಧಿಕಾರಿ ಎಸ್. ಅಶ್ವತಿ,ಜಿ.ಪಂ.ಮುಖ್ಯಕಾರ್ಯ ನಿರ್ವಹಣಾಧಿಕಾರಿ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಂಗಳಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.