Tag: Vidhan parishat

  • ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭ

    ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭ

    ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಮರು ಹಂಚಿಕೆಯ ಅಸಮಾಧಾನದ ನಡುವೆ ವಿಧಾನಮಂಡಲ ಅಧಿವೇಶನಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆಯಿಂದ ಫೆಬ್ರವರಿ ಐದರವರೆಗೂ ಅಧಿವೇಶನ ನಡೆಯಲಿದೆ. ಮೊದಲ ದಿನವಾದ ನಾಳೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

    ಈ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯೋ ಸಂಭವ ಇದೆ. ಕೃಷಿ ಕಾಯ್ದೆ ಖಂಡಿಸಿ ರೈತರು ನಡೆಸುತ್ತಿರುವ ಹೋರಾಟ, ಅನುದಾನ ವಿಳಂಬ ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಪ್ಲಾನ್ ಮಾಡ್ಕೊಂಡಿವೆ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯ ಮಸೂದೆಯನ್ನು ಪರಿಷತ್‍ನಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಬಾರಿ 11 ವಿಧೇಯಕಗಳು ಮಂಡನೆ ಆಗಲಿದೆ. ಕಲಾಪದಲ್ಲಿ ಒಂದು ದೇಶ, ಒಂದು ಚುನಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ.

    ಈ ಮಧ್ಯೆ, ವಿಧಾನ ಪರಿಷತ್‍ನ ಸಭಾಪತಿ ಸ್ಥಾನಕ್ಕೆ ಹಗ್ಗಜಗ್ಗಾಟ ಶುರುವಾಗಿದೆ. ಪರಿಷತ್‍ನಲ್ಲಿ ಬಿಜೆಪಿಗೆ ಬೆಂಬಲ ಕೊಟ್ಟಿರುವ ಜೆಡಿಎಸ್ ಸಭಾಪತಿ ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಆದರೆ ಇದನ್ನು ಬಿಜೆಪಿ ಇನ್ನೂ ಒಪ್ಪಿಲ್ಲ ಎನ್ನಲಾಗಿದೆ. ಇಂದು ಸಂಜೆ ನಡೆದ ಸಭೆಯಲ್ಲಿ ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ. ನಾಳೆ ಮತ್ತೊಮ್ಮೆ ಸಭೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

    ಜನವರಿ 29ರಂದು ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಲಿದ್ದು, ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಿರಲು ಜೆಡಿಎಸ್ ನಿರ್ಧರಿಸಿದೆ. ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಜೊತೆ ಬಸವರಾಜ ಹೊರಟ್ಟಿ ಸಭೆ ನಡೆಸಿದರು. ಬಳಿಕ ಮಾತಾಡಿದ ಹೊರಟ್ಟಿ, ನಮಗೆ ಸಭಾಪತಿ ಸ್ಥಾನ ಬೇಕೇ ಬೇಕು ಎಂದು ಹೇಳಿದರು.

  • ಕೈ ಪರಿಷತ್ ಸದಸ್ಯರಿಂದ ಸಚಿವೆ ಜಯಮಾಲ ವಿರುದ್ಧ ಅಸಮಾಧಾನ!

    ಕೈ ಪರಿಷತ್ ಸದಸ್ಯರಿಂದ ಸಚಿವೆ ಜಯಮಾಲ ವಿರುದ್ಧ ಅಸಮಾಧಾನ!

    ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಅವರನ್ನು ವಿಧಾನಪರಿಷತ್ ಸಭಾ ನಾಯಕಿಯನ್ನಾಗಿ ನೇಮಿಸಿದ್ದಕ್ಕೆ, ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಭಾನುವಾರ ಸಮನ್ವಯ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅನೇಕ ಶಾಸಕರು, ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಂದಾಗುತ್ತಿದ್ದಾರೆ. ಅವರಲ್ಲಿ ಅನೇಕರು ಜಯಮಾಲ ಅವರಿಗೆ ಮಂತ್ರಿಗಿರಿ ಹಾಗೂ ವಿಧಾನ ಪರಿಷತ್ ಸಭಾನಾಯಕಿ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜಯಮಾಲ ಅವರನ್ನು ಸಭಾನಾಯಕಿ ಮಾಡಬಾರದು. ಬದಲಿಗೆ ಹಿರಿಯ ಪರಿಷತ್ ಸದಸ್ಯರೊಬ್ಬರನ್ನು ಸಚಿವರನ್ನಾಗಿ ನೇಮಿಸಿ ಅವರಿಗೆ ಸಭಾ ನಾಯಕರ ಸ್ಥಾನ ನೀಡಬೇಕು ಎಂದು ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಹೆಚ್.ಎಂ.ರೇವಣ್ಣ, ಕೊಂಡಜ್ಜಿ ಮೋಹನ್ ಅವರ ನೇತೃತ್ವದ ಸದಸ್ಯರ ನಿಯೋಗ ಮನವಿ ಸಲ್ಲಿಸಿದೆ.

    ಕೆ.ಸಿ.ವೇಣುಗೋಪಾಲ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಬೆಳವಣಿಗೆ ಕುರಿತಾಗಿ ಗಮನಕ್ಕೆ ತಂದಿದ್ದಾರೆ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.