47ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಕ್ರಿಕೆಟ್ ದಿಗ್ಗಜ ನಿರ್ಧಾರ

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಭಾರತ ಹೋರಾಟವನ್ನು ಮುಂದುವರಿಸಿದೆ. ಇತ್ತ ಶುಕ್ರವಾರ 47ನೇ ವಸಂತಕ್ಕೆ ಕಾಲಿಡುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು, ಕೋವಿಡ್-19 ವಾರಿಯರ್ಸ್‍ಗೆ ಗೌರವ ಸಲ್ಲಿಸುವುದಕ್ಕಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಇದು ಆಚರಣೆಗಳ ಸಮಯವಲ್ಲ ಎಂದು ಸಚಿನ್ ಹೇಳಿದ್ದಾರೆ. ಹೀಗಾಗಿ ಅವರು ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲಾ ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸರು, ರಕ್ಷಣಾ ಸಿಬ್ಬಂದಿಗೆ ಸಲ್ಲಿಸುವ ಅತ್ಯುತ್ತಮ ಗೌರವ ಇದಾಗಿದೆ ಎಂದು ತೆಂಡೂಲ್ಕರ್ ಭಾವಿಸಿದ್ದಾರೆ ಎಂದು ಸಚಿನ್ ಆಪ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಭಾರತದ ಕ್ರಿಕೆಟ್ ದಂತ ಕಥೆ ಸಚಿನ್ ತೆಂಡೂಲ್ಕರ್ ಅವರು ಈಗಾಗಲೇ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿ ರಿಲೀಫ್ ಫಂಡ್‍ಗೆ ಒಟ್ಟು 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಜೊತೆಗೆ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಅಪ್ರತಿಮ ಬ್ಯಾಟ್ಸ್‌ಮನ್‌ಗೆ ಕೋಟ್ಯಂತರ ಅಭಿಮಾನಿಗಳು ಹಾಗೂ ಕ್ಲಬ್‍ಗಳು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಗೌರವ ಸಲ್ಲಿಸಲು ಸಿದ್ಧತೆ ನಡೆಸಿವೆ. ಒಂದು ಫ್ಯಾನ್ ಕ್ಲಬ್ ಸಚಿನ್ ಅವರ 40 ಅಪರೂಪದ ಫೋಟೋಗಳನ್ನು ಬಿಡುಗಡೆ ಮಾಡಲಿದೆ. ಇನ್ನೊಂದು ಕ್ಲಬ್ ದಂತಕಥೆ ಸಚಿನ್ ಕೈಗೊಂಡ ಎಲ್ಲಾ ಸಾಮಾಜಿಕ ಕಾರ್ಯಗಳು ಮತ್ತು ಸೇವೆಗಳನ್ನು ಜನರ ಮುಂದಿಡಲು ತಯಾರಿ ನಡೆಸಿದೆ.

Comments

Leave a Reply

Your email address will not be published. Required fields are marked *