ಇಂದು ಬಾಗಲಕೋಟೆಗೆ ಮೂವರು ಪ್ರಮುಖ ನಾಯಕರು ಭೇಟಿ

ಬಾಗಲಕೋಟೆ: ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಇಂದು ಜಿಲ್ಲೆಗೆ ಮೂರು ಜನ ಪ್ರಮುಖ ನಾಯಕರು ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮುಧೋಳ ಮತ್ತು ತೇರದಾಳ ಕ್ಷೇತ್ರದ ಬನಹಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಲಿರುವ ಆದಿತ್ಯನಾಥ್, ಮಧ್ಯಾಹ್ನ ಸುಮಾರು 12.30ಕ್ಕೆ ಮುಧೋಳ ನಗರಕ್ಕೆ ಭೇಟಿ ನೀಡಲಿದ್ದಾರೆ. 12.30 ರಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರ್.ಎಮ್.ಜೆ ಕಾಲೇಜ್ ವರೆಗೂ ರೋಡ್ ಶೋ ಮಾಡಲಿದ್ದಾರೆ. ನಂತರ 1.30 ಕ್ಕೆ ಆರ್.ಎಮ್.ಜೆ ಕಾಲೇಜು ಮೈದಾನದಲ್ಲಿ ಬಹಿರಂಗ ಪ್ರಚಾರ ಸಭೆ ನಡೆಸಲಿದ್ದು, ಮುಧೋಳ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮತಯಾಚನೆ ಮಾಡಲಿದ್ದಾರೆ.

ಸಭೆಯ ಬಳಿಕ ಮಧೋಳದಿಂದ ತೇರದಾಳ ಮತಕ್ಷೇತ್ರ ಬನಹಟ್ಟಿ ಪಟ್ಟಣ ಎಸ್.ಆರ್.ಎ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ ಸುಮಾರು 4 ಗಂಟೆಗೆ ಬಹಿರಂಗ ಪ್ರಚಾರ ಸಭೆ ನಡೆಸಲಿದ್ದಾರೆ. ತೇರದಾಳ ಬಿಜೆಪಿ ಅಭ್ಯರ್ಥಿ ಸಿದ್ದು ಸವದಿ ಪರ ಪ್ರಚಾರ ಭಾಷಣ ಮಾಡಲಿದ್ದಾರೆ.

ಸಂಜೆ  ಕೇಂದ್ರ ಸಚಿವೆ ಸ್ಮೃತಿ ಇರಾನಿ ಬದಾಮಿ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ರಾಮುಲು ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುನಗುಂದ ಪಕ್ಷೇತರ ಅಭ್ಯರ್ಥಿ ಎಸ್.ಆರ್ ನವಲಿಹಿರೇಮಠ ಪರ ಹುನಗುಂದ ಪಟ್ಟಣದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಬದಾಮಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಪರ ರೋಡ್ ಶೋ ಪ್ರಚಾರ ಸಭೆ ನಡೆಸಲಿದ್ದಾರೆ.

Comments

Leave a Reply

Your email address will not be published. Required fields are marked *