ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ- ವೆಂಟಿಲೇಟರ್ ಮೂಲಕವೇ ಉಸಿರಾಟ

– ಉಡುಪಿಗೆ ಇಂದು ಉಮಾಭಾರತಿ ಭೇಟಿ?

ಉಡುಪಿ: ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಧ್ಯರಾತ್ರಿ ತಪಾಸಣೆ ನಡೆಸಿದ ತಜ್ಞ ವೈದ್ಯರು ಕೊಂಚಮಟ್ಟಿನ ಚೇತರಿಕೆ ಗುರುತಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಔಷಧಿ ಪ್ರಮಾಣ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದ್ದು, ಇಂದು ಈ ಬಗ್ಗೆ ವೈದ್ಯತಂಡ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಶ್ರೀಗಳಿಗೆ ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಮುಂದುವರಿದಿದೆ ಎಂದು ಶ್ರೀಗಳ ಆಪ್ತ ಸಹಾಯಕರು ಮಾಹಿತಿ ನೀಡಿದ್ದಾರೆ.

ಪೇಜಾವರಶ್ರೀ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಕೇಂದ್ರ ಮಾಜಿ ಸಚಿವೆ ಉಮಾಭಾರತಿ ಉಡುಪಿಗೆ ಆಗಮಿಸುವ ಸಾಧ್ಯತೆಗಳಿದೆ. ಪೇಜಾವರ ಶ್ರೀಗಳಿಂದ ದೀಕ್ಷೆ ಪಡೆದಿರುವ ಉಮಾಭಾರತಿ, ಇಂದು ಗುರುಗಳ ದರ್ಶನ ಪಡೆಯಲಿದ್ದಾರೆ. ರೈಲಿನ ಮೂಲಕ ಉಡುಪಿಗೆ ಧಾವಿಸುತ್ತಿರುವ ಉಮಾಭಾರತಿ ಅವರು ಸಂಜೆ ಕೆಎಂಸಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಶುಕ್ರವಾರ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶ್ರೀಗಳ ಎದೆಯಲ್ಲಿ ಕಟ್ಟಿದ ಕಫ ನಿಧಾನವಾಗಿ ಕರಗುತ್ತಿದೆ. ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಭಕ್ತರು ಯಾವುದೇ ಆತಂಕ ಪಡಬೇಕಿಲ್ಲ. ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬೇಡಿ, ಎರಡು ದಿನದಿಂದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದು ಸ್ವಾಮೀಜಿ ಆಪ್ತ ಸಹಾಯಕ ವಿಷ್ಣುಮೂರ್ತಿ ಆಚಾರ್ಯ ಭಾನುವಾರ ಹೇಳಿದ್ದರು.

Comments

Leave a Reply

Your email address will not be published. Required fields are marked *