ಪ್ರಧಾನಿ ಭದ್ರತೆ ವಿಚಾರದಲ್ಲಿ ಅವರಿಗೇಕೆ ಮಾಹಿತಿ ನೀಡಬೇಕು? – ಚರಣ್‍ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ಕಿಡಿ

ನವದೆಹಲಿ: ಫಿರೋಜ್‍ಪುರ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ವಿಚಾರದ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಮಾಹಿತಿ ನೀಡಿದ್ದ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಪ್ರಿಯಾಂಕಾ ಗಾಂಧಿ ಅವರಿಗೆ ಪ್ರಧಾನಿ ಅವರ ಭದ್ರತೆಯ ಬಗ್ಗೆ ಏಕೆ ತಿಳಿಸಲಾಗಿತ್ತು ಎಂದು ಪ್ರಶ್ನಿಸಿದ್ದಾರೆ. ಒಬ್ಬ ಹಾಲಿ ಮುಖ್ಯಮಂತ್ರಿ ಪ್ರಧಾನಿ ಭದ್ರತೆಯ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ವಿವರಿಸುತ್ತಾರೆ. ಏಕೆ? ಪ್ರಿಯಾಂಕಾ ಅವರು ಯಾವ ಸಾಂವಿಧಾನಿಕ ಹುದ್ದೆ ಹೊಂದಿದ್ದಾರೆ? ಪ್ರಧಾನಿ ಭದ್ರತೆ ವಿಚಾರದಲ್ಲಿ ಪರಿಗಣಿಸಲು ಅವರು ಯಾರು? ಈ ಸಂಬಂಧ ಗಾಂಧಿ ಕುಟುಂಬ ಸ್ಪಷ್ಟನೆ ನೀಡಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

ಮತ್ತೊಂದೆಡೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಸೋನಿಯಾ ಗಾಂಧಿಯವರ ಮುಖ್ಯಮಂತ್ರಿಗಳಾದ ಚರಣ್‍ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿಯವರು ಬಂದಾಗ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಪ್ರಿಯಾಂಕಾ ವಾದ್ರಾ ಅವರಿಗೆ ಏಕೆ ಘಟನೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಅಷ್ಟಕ್ಕೂ ಪ್ರಿಯಾಂಕಾ ವಾದ್ರಾ ಯಾರೆಂದು ತಿಳಿಯಲು ಕುತೂಹಲವಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜನವರಿ 5ರಂದು ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ತೆರಳಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿತ್ತು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈ ಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು.

Comments

Leave a Reply

Your email address will not be published. Required fields are marked *